ಲಖನೌ (ಉತ್ತರಪ್ರದೇಶ): ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಇಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಎರಡನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಎರಡನೇ ಅವಧಿಗೆ ಅಧಿಕಾರಕ್ಕೆ ತರಲುವಲ್ಲಿ ಯಶಸ್ವಿಯಾಗಿರುವ ಯೋಗಿ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ.
ಚುನಾವಣೆ ಘೋಷಣೆಯಾಗಿದ್ದ ಸಂದರ್ಭದಲ್ಲೇ ಯೋಗಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಹೇಳಿಕೊಂಡಿತ್ತು. ಆದರೆ, ನಿನ್ನೆ ನಡೆದ ಅನೌಪಚಾರಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಈ ಮೂಲಕ ಇಂದಿನಿಂದ ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಧಿಗೆ ಯೋಗಿ ಆಡಳಿತ ಶುರುವಾಗಲಿದೆ.

ಲಖನೌನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಏಕತಾ ಕ್ರಿಕೆಟ್ ಮೈದಾನದಲ್ಲಿ ಇಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. ರಾಜ್ಯದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಾರ್ಟಿ 255 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.
ಬಾಲಿವುಡ್ ಮಂದಿಗೂ ಆಹ್ವಾನ: ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಅನೇಕ ಬಾಲಿವುಡ್ ನಟರು ಭಾಗಿಯಾಗಲಿದ್ದಾರೆ. ಪ್ರಮುಖವಾಗಿ ಅಕ್ಷಯ್ ಕುಮಾರ್, ಕಂಗನಾ ರಣಾವತ್, ಬೋನಿ ಕಪೂರ್ ಪಾಲ್ಗೊಳ್ಳಲಿದ್ದು, ದಿ ಕಾಶ್ಮೀರಿ ಫೈಲ್ಸ್ ಚಿತ್ರತಂಡಕ್ಕೂ ಆಹ್ವಾನ ನೀಡಲಾಗಿದೆ.
