Breaking – ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್..! ಮೇ 20ರ ಮುಷ್ಕರ ಕೈಬಿಡುವಂತೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮೇ 20ರಂದು ಘೋಷಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಯಾವುದೇ ಕಾರಣಕ್ಕೂ ಮುಷ್ಕರ ನಡೆಸಬಾರದು ಎಂದು ನ್ಯಾಯಾಲಯ ಸೂಚನೆ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ತಡೆಗಟ್ಟುವಂತೆ ಸೂಚಿಸಿದೆ. ಈಗಾಗಲೇ ಸರ್ಕಾರ ಶೇ.12.5ರಷ್ಟು ವೇತನ ಹೆಚ್ಚಳ ಘೋಷಿಸಿರುವ ಹಿನ್ನೆಲೆಯಲ್ಲಿ ತಕ್ಷಣ ಮುಷ್ಕರ ನಡೆಸುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕೋರ್ಟ್ ಸಲಹೆ ನೀಡಿದೆ. ಕಾರ್ಮಿಕ ಆಯುಕ್ತರ ಮುಂದೆ ರಾಜಿ ಸಂಧಾನ ಪ್ರಕ್ರಿಯೆ ನಡೆಯುತ್ತಿರುವಾಗ ಮುಷ್ಕರ ನಡೆಸುವುದು ಸರಿಯಲ್ಲ ಎಂಬ ವಾದವನ್ನೂ ನ್ಯಾಯಾಲಯ ಪರಿಗಣಿಸಿದೆ.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಶೇ.25ರಷ್ಟು ವೇತನ ಹೆಚ್ಚಳ, ಬಾಕಿ ವೇತನ ಬಿಡುಗಡೆ, ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಗಳಿಗೆ ಪರಿಹಾರ ಹಾಗೂ ವಿವಿಧ ಭತ್ಯೆಗಳ ಹೆಚ್ಚಳ ಸೇರಿವೆ.

ಹೈಕೋರ್ಟ್ ಆದೇಶದೊಂದಿಗೆ ರಾಜ್ಯದ ಲಕ್ಷಾಂತರ ಪ್ರಯಾಣಿಕರು ತಾತ್ಕಾಲಿಕ ನೆಮ್ಮದಿ ಕಂಡಂತಾಗಿದೆ.

Leave a Reply

Your email address will not be published. Required fields are marked *