ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ (Murder) ಪ್ರಕರಣ ಮಾಸುವ ಮುನ್ನವೇ ನಿನ್ನೆ (ಜುಲೈ 28) ರಾತ್ರಿ ಮಂಗಳೂರಿನ ಸೂರತ್ಕಲ್ನಲ್ಲಿ ಮತ್ತೊಂದು ಬರ್ಬರ ಕೊಲೆ ನಡೆದಿದೆ. ಫಾಜಿಲ್ ಕೊಲೆಯಾದ ದುರ್ದೈವಿ. ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವೀಣ್ ನೆಟ್ಟಾರು ಹಾಗೂ ಫಾಜಿಲ್ ಹತ್ಯೆಯನ್ನು ಖಂಡಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಸಿಎಂ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಎಂದು ಕಿಡಿಕಾರಿದ್ದಾರೆ.
ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡ ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡಲೇ ಗೃಹ ಸಚಿವರನ್ನ ಕಿತ್ತು ಹಾಕದಿದ್ದರೆ, ರಾಜ್ಯದಲ್ಲಿ ಜನ ಮನೆಯಿಂದ ಹೊರ ಬರುವುದು ಕಷ್ಟವಾಗಬಹುದು ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.